ನವದೆಹಲಿ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಾಳೆ ಮಧ್ಯರಾತ್ರಿ ಅಥವಾ ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ.ಬಹುಶಃ ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದರು.
ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆ ಇತ್ತು. ಆದರೆ ಹೆಚ್ಚಿನ ಚರ್ಚೆಗಳು ನಡೆಯಬೇಕಾಗಿರುವುದರಿಂದ, ಅದನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಬಹುದು ಎಂದು ತಿಳಿಸಿದ್ದಾರೆ.’ಕೆಲವು ಅಭ್ಯರ್ಥಿಗಳಿಗೆ ಹೆಚ್ಚಿನ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಬೇಕಾಗಿದೆ, ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಬೇಕಾಗಿದೆ. ಹೊಸ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ’ ಎಂದು ಹೇಳಿದರು.ನಾನು ಈಗಾಗಲೇ ಹೇಳಿದಂತೆ ಶಿಗ್ಗಾಂವಿಯಲ್ಲೇ ಸ್ಪರ್ಧಿಸಲಿದ್ದೇನೆ. ಅದರ ಹೊರತಾಗಿ ಬೇರೆ ಯಾವುದೇ ಕ್ಷೇತ್ರಗಳಲ್ಲಿ ಸ್ಪರ್ಧಿಸಲ್ಲ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎಲ್ಲಾ ಸಭೆಯಲ್ಲೂ ಭಾಗಿಯಾಗಿದ್ದಾರೆ. ಅಭ್ಯರ್ಥಿಗಳ ಪಟ್ಟಿ ಸಂಬಂಧ ನಿನ್ನೆ, ಇಂದು ಸುದೀರ್ಘ ಸಭೆ ನಡೆದಿದೆ ಎಂದರು.
224 ಸದಸ್ಯರ ವಿಧಾನಸಭೆ ಚುನಾವಣೆಗೆ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಆದರೆ, ಮಧ್ಯಾಹ್ನದ ನಂತರ ಮಾತನಾಡಿದ ಯಡಿಯೂರಪ್ಪ, ‘ನಿನ್ನೆ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆಗಳು ನಡೆದವು. ಇಂದು ಮತ್ತೆ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇನ್ನೂ ಕೆಲವು ಸ್ಪಷ್ಟೀಕರಣಗಳಿಗಾಗಿ ನನ್ನನ್ನು ಕರೆದಿದ್ದಾರೆ. ನಾನು ಅವರಿಗೆ ವಿವರಿಸಿದ್ದೇನೆ. ಅವರು ಇಂದು ಸಂಜೆ ಅಥವಾ ನಾಳೆ ಅದನ್ನು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಫೈನಲ್ ಮಾಡಲಿ, ಬಿಡುಗಡೆ ಮಾಡಬಹುದು ಎಂದರು.