ಮಾಣಿ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಲಿದಾನ ಮಾಡಿದ ರಾಷ್ಟ್ರಪಿತ ಮಹಾತ್ಮಾಗಾಂಧಿ ಮತ್ತಿತರ ಮಹಾನ್ ನಾಯಕರನ್ನು ಮಾದರಿಯಾಗಿ ನಮ್ಮ ಮಕ್ಕಳಿಗೆ ತೋರಿಸಬೇಕು ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಗ್ರಾಮ ಪಂಚಾಯತ್ ವಠಾರದಲ್ಲಿ ಜರಗಿದ ಅಮೃತಮಹೋತ್ಸವ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣಗೊಳಿಸಿ ಬಳಿಕ ನಡೆದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಸಂಗ್ರಾಮದ ನಂತರ ತೀರಾ ಹದಗೆಟ್ಟಿದ್ದ ದೇಶದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ಸರಿದೂಗಿಸಲು ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಮತ್ತು ಅವರ ನಂತರದ ಹಲವು ಮಂದಿ ಪ್ರಧಾನಿಯವರ ತ್ಯಾಗ ಮತ್ತು ಪರಿಶ್ರಮ ಪ್ರಶಂಸನೀಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ವಾತಂತ್ರ್ಯೋತ್ಸವದ ಅಮೃತ ಸಂಭ್ರಮದ ವಿಶೇಷ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಶುಲ್ಕ ಸಂಗ್ರಹಕ್ಕೆ ನೂತನ ತಂತ್ರಾಂಶವನ್ನು ಬಿಡುಗಡೆಗೊಳಿಸಲಾಯಿತು ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಸಂಪೂರ್ಣ ಡಿಜಿಟಲೀಕರಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅಧ್ಯಕ್ಷರು ಹೇಳಿದರು.
ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಾಣಿಗುತ್ತು ಸಚಿನ್ ರೈಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತಾ, ಮಿತ್ರಾಕ್ಷಿ, ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿಯವರು ಸಹಕರಿಸಿದರು.