ಕಾಸರಗೋಡು: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.
ಇದರಂತೆ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ವಿವಾಹ, ಮರಣಾನಂತರ ಕಾರ್ಯಕ್ರಮಗಳಿಗೆ ಗರಿಷ್ಟ ಸಂಖ್ಯೆ 50 ಕ್ಕೆ ಸೀಮಿತಗೊಳಿಸಿದೆ. ಜನವರಿ 15 ರಿಂದ ಟೆಸ್ಟ್ ಪಾಸಿಟಿವಿಟಿ ರೇಟ್ 20 ಶೇಕಡಾ ಕ್ಕಿಂತ ಅಧಿಕವಾಗಿದ್ದು, ಈ ಹಿನ್ನೆಲೆಯಲ್ಲಿ ನಿಯಂತ್ರಣಗಳನ್ನು ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕ್ಲಸ್ಟರ್ ಕಂಡುಬಂದಲ್ಲಿ ಆಯಾ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳನ್ನು 15 ದಿನಗಳ ಕಾಲ ಮುಚ್ಚುವಂತೆ ಆದೇಶ ನೀಡಲಾಗಿದೆ. ಈ ಬಗ್ಗೆ ಸಂಬಂಧಪಟ್ಟ ಶಾಲಾ ಮುಖ್ಯಸ್ಥರು ಗಮನ ಹರಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕಿದೆ.
ಮಾರುಕಟ್ಟೆ , ಪ್ರವಾಸಿ ಕೇಂದ್ರಗಳು, ಬೀಚ್ ಗಳಲ್ಲಿ ಜನಸಂದಣಿ ಉಂಟಾಗದಂತೆ ಗಮನ ಹರಿಸಬೇಕು. ಈ ಬಗ್ಗೆ ಗಮನ ಹರಿಸಲು ಪೊಲೀಸ್, ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮತ್ತು ಸ್ಥಳೀಯ ಅಧಿಕಾರಿಗಳು ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವದನ್ನು ಖಚಿತ ಪಡಿಸಿಕೊಳ್ಳಬೇಕು. ಸರಕಾರಿ, ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯಗಳ ಎಲ್ಲಾ ಸಭೆ, ಸಮಾರಂಭಗಳನ್ನು ಆನ್ ಲೈನ್ ಮೂಲಕ ನಡೆಸಬೇಕು.
ಧಾರ್ಮಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ಸಾಧ್ಯವಾದಷ್ಟು ಆನ್ಲೈನ್ನಲ್ಲಿ ನಡೆಸಬೇಕು. ನೇರವಾಗಿ ನಡೆಯುವ ಕಾರ್ಯಕ್ರಮಗಲ್ಲಿ 50 ಕ್ಕಿಂತ ಅಧಿಕ ಮಂದಿ ಪಾಲ್ಗೊಳ್ಳಬಾರದು. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕಾರ್ಯಕ್ರಗಳಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು . ಅಲ್ಲದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ರೋಗ ಲಕ್ಷಣ ಇರುವವರು ಸಾರ್ವಜನಿಕ ಸ್ಥಳಗಳಿಗೆ ತೆರಳಬಾರದು . ಕೋವಿಡ್ ಪರೀಕ್ಷೆಗೆ ಒಳಗಾಗಬೇಕು . ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವ್ಯಾಪಾರ ಮಳಿಗೆಗೆ ತೆರಳುವವರು ಮಾಸ್ಕ್ ಧರಿಸುವುದರ ಜೊತೆಗೆ ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ