ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆಯಡಿಯಲ್ಲಿ ಯಜಮಾನಿ ಮಹಿಳೆಯರಿಗೆ ಕೊಡಲಾಗುತ್ತಿರುವ 2000 ಸಹಾಯ ಧನವು ಅಕ್ಟೋಬರ್ ತಿಂಗಳಲ್ಲಿ ಕೆಲ ಮಹಿಳೆಯರಿಗೆ ಸಂದಾಯ ಆಗದಿದ್ದು, ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರದ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ‘ಗೃಹಲಕ್ಷ್ಮೀ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಹಣ ಸಂದಾಯವಾಗಬೇಕು. ಅಲ್ಲದೇ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವವರ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಕಾರ್ಯಪ್ರವೃತ್ತರಾಗಬೇಕು, ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ಸಮಸ್ಯೆಗಳನ್ನು ಪರಿಹರಿಸಬೇಕು. ಆಗಸ್ಟ್ ನಲ್ಲಿ ಶೇ.88ರಷ್ಟು ಮಂದಿಗೆ ಹಣ ಸಂದಾಯವಾಗಿದೆ. ಸೆಪ್ಟೆಂಬರ್ ನಲ್ಲಿ ಹಂತ ಹಂತವಾಗಿ ಹಣ ಹಾಕಲಾಗಿದೆ. ಅಕ್ಟೋಬರ್ ನಲ್ಲಿ ಶೇ.100ರಷ್ಟು ಫಲಾನುಭಾವಿಗಳಿಗೆ ಸಂದಾಯವಾಗುವಂತೆ ಮಾಡಬೇಕು, ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇನ್ನು ಬ್ಯಾಂಕ್ ಖಾತೆಯ ಸಮಸ್ಯೆಯಿಂದ ಕೆಲವರಿಗೆ ಅಕ್ಟೋಬರ್ ತಿಂಗಳ ಹಣ ಸಂದಾಯವಾಗಿಲ್ಲ. ಶೀಘ್ರದಲ್ಲಿಯೇ ಆ ಸಮಸ್ಯೆಯನ್ನು ಸರಿಪಡಿಸಿ ಅವರ ಖಾತೆಗೂ 2000 ಹಣ ಸಂದಾಯ ಮಾಡುವಂತೆ ಕ್ರಮವಹಿಸಿ ಎಂದು ಸೂಚಿಸಿದರು.