- Advertisement -
- Advertisement -
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 206 ರ ಶಿವಪುರ ಗೇಟ್ ಬಳಿಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಕಳೆದ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಆನಂದ್ ಹಾಗೂ ರಂಜಿತಾ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿದ್ದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಮದುವೆಯನ್ನು ಮುಗಿಸಿಕೊಂಡು ಹಿಂದೆ ಬರುವಾಗ ರಾಷ್ಟ್ರೀಯ ಹೆದ್ದಾರಿ 206 ರ ಶಿವಪುರ ಗೇಟ್ ಬಳಿ ತರೀಕೆರೆ ಕಡೆಯಿಂದ ಬಂದಂತಹ ಕಾರು ದಂಪತಿಗಳಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಬೈಕ್ ಎತ್ತರಕ್ಕೆ ಹಾರಿ ಕೆಳಬಿದ್ದಿದೆ ಎನ್ನಲಾಗಿದೆ.
ಬೈಕ್ ಚಾಲಕ ಆನಂದ್ ಅವರ ತಲೆ ಮತ್ತು ಕೈಕಾಲುಗಳಿಗೆ ಗಂಭೀರವಾಗಿ ಗಾಯವಾದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರೊಂದಿಗಿದ್ದ ಪತ್ನಿ ರಂಜಿತಾ ಕೂಡ ಗಾಯಗೊಂಡಿದ್ದು ಅವರಿಗೆ ತಕ್ಷಣವೇ ಬೀರೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -