ಮಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ಚುನಾವಣೆಯ ಫಲಿತಾಂಶವನ್ನು ಗಮನಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಪರ ಒಲವಿದ್ದು, ಮುಂದೆ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದ್ದು, ಆ ಮೂಲಕ 2023ರ ವರ್ಷ ಸಂಪೂರ್ಣ ‘ಕಾಂಗ್ರೆಸ್ ವರ್ಷ’ ಆಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ ನುಡಿದರು.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಉಪಚುನಾವಣೆಗಳಲ್ಲಿ, ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿ ಬಂದಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ” ಎಂದು ಹೇಳಿದರು
ಇನ್ನು ರಾಮನಗರದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯಿಸಿದ ಅವರು, “ರಾಮನಗರ ಘಟನೆ ಬಿಜೆಪಿಯ ವಿಶ್ವರೂಪವನ್ನು ತೋರಿಸಿದೆ. ಸಿಎಂ ಹಾಜರಿದ್ದ ಕಾರ್ಯಕ್ರಮದಲ್ಲಿ ಸಚಿವರಾದವರಿಗೆ ಜನರ ಸಮ್ಮುಖದಲ್ಲಿ ಏನು ಮಾತನಾಡಬೇಕು ಎಂಬುದರ ಬಗ್ಗೆ ಅರಿವಿರಬೇಕು. ರಾಮನಗರದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಹಾಗಾಗಿ ಕೆಟ್ಟ ಚೌಕಟ್ಟಿನಲ್ಲಿ ಕಾಂಗ್ರೆಸ್ನ್ನು ಜನರ ಮುಂದೆ ಬಿಂಬಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.