ಉಡುಪಿ: ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ನಡೆದ ಕೇವಲ 24 ಗಂಟೆಗಳಲ್ಲಿ ಬ್ರಹ್ಮಾವರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ವಾಸು ಪೂಜಾರಿ ಎಂಬವರ ಹೆಂಡತಿ ಪ್ರೇಮ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆಯ ಹೊರಗಡೆ ಪಾತ್ರೆ ತೊಳೆಯುತ್ತಿದ್ದರು. ಈ ವೇಳೆ ಮನೆ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶಿಸಿದ ಸುರೇಶ್ ಎಂಬಾತ ಮನೆಯನ್ನು ಜಾಲಾಡಿ ಸುಮಾರು 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಅನ್ನು ಕಳವು ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಇದನ್ನು ನೋಡಿದ ಪ್ರೇಮ ಅವರು ಹೊರಗಡೆ ಹೋಗಿದ್ದ ತಮ್ಮ ಪತಿಗೆ ತಕ್ಷಣ ಮಾಹಿತಿ ನೀಡಿದ್ದಾರೆ. ಬಳಿಕ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದಾರೆ.
ಅದರಂತೆ ಆರೋಪಿಯನ್ನು 24 ಗಂಟೆಯೊಳಗೆ ಬ್ರಹ್ಮಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಯಶವಂತಪುರ ಮೋಹನ್ ಕುಮಾರ್ ನಗರ ನಿವಾಸಿ ಸುರೇಶ್ ಯಾನೆ ಸೂರ್ಯ (31) ಬಂಧಿತ ಆರೋಪಿ. ಈತ ಮೂಲತಃ ಬ್ರಹ್ಮಾವರ ತಾಲೂಕಿನ ಪೆಜಮಂಗೂರು ಗ್ರಾಮದ ಪ್ರಗತಿ ನಗರ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಈತ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಳವು ಪ್ರಕರಣದ ಆರೋಪಿಯಾಗಿದ್ದು, ಪ್ರಸ್ತುತ ಆರೋಪಿ ಬೆಂಗಳೂರಿನ ಬಿಬಿಎಂಪಿಯಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.