ಬಂಟ್ವಾಳ: ಫರಂಗಿಪೇಟೆ ಸಮೀಪದ ಸುಜೀರು ಬಳಿ ಶ್ರೀ ದೇವಕಿಕೃಷ್ಣ ರವಳನಾಥ ದೇಗುಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.
ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಸಮೀಪದ ಸುಜೀರು ಎಂಬಲ್ಲಿರುವ ದೇಗುಲಕ್ಕೆ ಸೋಮವಾರ ಮುಂಜಾನೆ ನುಗ್ಗಿದ ಕಳ್ಳರು ಸುಮಾರು 2.30 ಲಕ್ಷದ ಮೌಲ್ಯದ ನಗ ನಗದುಗಳನ್ನು ಕದ್ದಿದ್ದಾರೆ. ಮಂದಿರಕ್ಕೆ ಸಂಬಂಧಿಸಿದ ಪುರಾತನ ಕಾಲದ ಸುಮಾರು ಒಂದೂವರೆ ಕೆ.ಜಿ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ ಎನ್ನಲಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿದ್ದ ನಗದನ್ನು ಕದ್ದಿದ್ದಾರೆ ಎನ್ನಲಾಗಿದೆ.
ಭಾನುವಾರ ದೇಗುಲದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಅಂದಾಜಿಸಲಾಗಿದೆ. ಕಳ್ಳತನದ ಎಲ್ಲಾ ದೃಶ್ಯಾವಳಿಗಳು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.ಕಳ್ಳರ ತಂಡದಲ್ಲಿ 5 ಜನರಿದ್ದರು ಎನ್ನಲಾಗಿದೆ. ಸುಮಾರು 3.30 ರ ಸಮಯದಲ್ಲಿ ದೇಗುಲದ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶ ಮಾಡಿದ್ದಾರೆ. ಬಳಿಕ ದೇವಸ್ಥಾನದ ಸುತ್ತಲೂ ತಿರುಗಾಡಿ ಮಾಹಿತಿ ಪಡೆದುಕೊಂಡು, ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ್ದಾರೆ. ಅಲ್ಲಿ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿಕೊಂಡು ದೇವಳದ ಗೋಪುರಕ್ಕೆ ಬಂದು, ಕಳ್ಳತನ ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಒಂದೇ ಚೀಲದಲ್ಲಿ ಭದ್ರಗೊಳಿಸಿ ವಾಪಸು ಹೋಗುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳರ ಕೈಯಲ್ಲಿ ಮಾರಕಾಸ್ತ್ರಗಳಿದ್ದದ್ದು ಕೂಡಾ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳತನ ಮಾಡಿದ ಬಳಿಕ ಸುಮಾರು 4 ಗಂಟೆ ಅಂದಾಜಿಗೆ ದೇವಸ್ಥಾನದಿಂದ ಹೊರಗೆ ಹೋಗಿದ್ದಾರೆ ಎನ್ನಲಾಗಿದೆ.
ಇನ್ನು ದೇಗುಲದ ಕಂಪೌಂಡ್ ನ ಒಳಗಡೆಯೇ ಅರ್ಚಕರ ಮನೆಯಿದೆ. ಕಳ್ಳರು ದೇವಸ್ಥಾನದ ಒಳಗೆ ಪ್ರವೇಶ ಮಾಡುವುದನ್ನು ಇವರ ಸಾಕು ನಾಯಿ ಗಮನಿಸಿ ಜೋರಾಗಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳಿದ್ದರಿಂದ ಅರ್ಚಕರಿಗೆ ಎಚ್ಚರವಾಗಿದೆ. ನಾಯಿ ಯಾಕೆ ಬೊಗಳುತ್ತಿದೆ ಎಂದು ಸಿ.ಸಿ.ಕ್ಯಾಮರಾವನ್ನು ನೋಡಿದಾಗ ದೇವಸ್ಥಾನದ ಒಳಗೆ ಮೂವರು ಕಂಡುಬಂದಿದ್ದಾರೆ. ಕೂಡಲೇ ಅರ್ಚಕರು ದೇವಸ್ಥಾನದ ಮ್ಯಾನೇಜರ್ ಅವರಿಗೆ ವಿಚಾರ ತಿಳಿಸಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಡು ಮೂವರು ದೇವಸ್ಥಾನದ ಒಳಗೆ ಇದ್ದು, ನನಗೆ ಒಬ್ಬನಿಗೆ ಹೋಗಲು ಹೆದರಿಕೆ ಆಗುತ್ತಿದ್ದು ಅವರನ್ನು ಬರುವಂತೆ ತಿಳಿಸಿದ್ದಾರೆ. ಕೂಡಲೇ ಅವರು ಇಲ್ಲಿಗೆ ಬಂದರಾದರೂ ಅದಾಗಲೇ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಕಳ್ಳರು ಚಪ್ಪಲಿ ಧರಿಸದೆ ಗರ್ಭಗುಡಿಯೊಳಗೆ ಪ್ರವೇಶ ಮಾಡಿ, ಅಲ್ಲಿಂದ ಚಿನ್ನಾಭರಣಗಳನ್ನು ಕಳವು ಮಾಡುವ ದೃಶ್ಯ ಸೆರೆಯಾಗಿದೆ. ಇದನ್ನು ಖಚಿತಪಡಿಸಿಕೊಂಡ ಬಳಿಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ಹರೀಶ್ ಮತ್ತು ಮೂರ್ತಿ ಭೇಟಿ ನೀಡಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.