ಬಂಟ್ವಾಳ: ಇಲ್ಲಿನ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರು ನಿಗೂಢವಾಗಿ ನಾಪತ್ತೆಯಾಗಿ ಇಂದಿಗೆ 5 ದಿನಗಳು ಕಳೆದರೂ ಪತ್ತೆಯಾಗಿಲ್ಲ. ಈ ನಿಟ್ಟಿನಲ್ಲಿ ಬಾಲಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಹಿಂದೂಪರ ಸಂಘಟನೆಗಳು ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಚರಣೆ ಯಶಸ್ವಿ ಕಾಣದೆ ಇರುವುದರಿಂದ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಫರಂಗಿಪೇಟೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ದಿಗಂತ್ ನಾಪತ್ತೆಯಾದ ಬಾಲಕ.
ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಮುಖಂಡರು, ಬಿಜೆಪಿ ನಾಯಕರಿಗೆ ಭದ್ರತೆಯಿಲ್ಲದಂತಾಗಿದೆ. ನಾಪತ್ತೆಯಾದ ಬಾಲಕನನ್ನು ತಕ್ಷಣವೇ ಪೋಲೀಸರು ಪತ್ತೆ ಹಚ್ಚಬೇಕು. ಫರಂಗಿಪೇಟೆ ಪರಿಸರದಲ್ಲಿ ಗಾಂಜಾ ಮಾಫಿಯಾ ಹೆಚ್ಚಾಗಿದ್ದು, ಈ ಮೊದಲು ಇಲ್ಲಿ ಬಿಜೆಪಿ ಮುಖಂಡನ ಮಾರಣಾಂತಿಕ ಹಲ್ಲೆಯಾಗಿತ್ತು. ಎರಡು ದಿನಗಳಲ್ಲಿ ಬಾಲಕನ ನಾಪತ್ತೆ ಪ್ರಕರಣ ಭೇಧಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿಭಟನೆಯ ಕಿಡಿ ಹರಡಲಿದೆ ಎಂದು ಎಚ್ಚರಿಕೆ ನೀಡಿದರು.
ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜ, ಪ್ರಸಾದ್ ಕುಮಾರ್ ರೈ, ರವೀಂದ್ರ ಕಂಬಳಿ, ಭರತ್ ಕುಮ್ಡೆಲು, ಉಮೇಶ್ ಶೆಟ್ಟಿ ಬರ್ಕೆ, ತಾರಾನಾಥ ಕೊಟ್ಟಾರಿ, ಫಾರೂಕ್ ಪರಂಗಿಪೇಟೆ, ರಮ್ಲಾನ್, ನಂದನ್ ಮಲ್ಯ, ಮನೋಜ್ ಆಚಾರ್ಯ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.