ಚಿತ್ರದುರ್ಗ: ಹಂದಿಗಳನ್ನು ಕಳವು ಮಾಡಲು ಬಂದ ದುಷ್ಕರ್ಮಿಗಳು ಹಂದಿ ಶೆಡ್ನಲ್ಲಿ ಮಲಗಿದ್ದ ಮೂವರನ್ನು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಜಿಲ್ಲೆಯ ನಾಯಕನಹಟ್ಟಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಹಂದಿಗಳನ್ನು ಕದಿಯಲು ಬಂದಿದ್ದ ಕಳ್ಳರ ಗುಂಪೊಂದು ಮೂವರನ್ನು ಕ್ರೂರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಂದಿ ಕೃಷಿಕ ಮಾರೇಶ್, ಅವರ ಮಗ ಸೀನಪ್ಪ ಮತ್ತು ಮಾರೇಶ್ ಅವರ ಸೋದರಳಿಯ ಯೆಲ್ಲೇಶ್ ಕೊಲೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪರಾಧಿಗಳಿಗಾಗಿ ಬಲೆ ಬೀಸಿದ್ದಾರೆ.
ಕುಟುಂಬಸ್ಥರು ಆರೋಪಿಸಿರುವಂತೆ ಒಂದು ವಾರದ ಹಿಂದೆ ನಾಯಕನಹಟ್ಟಿಗೆ ಬೊಲೆರೊ ವಾಹನದಲ್ಲಿ ಬಂದಿದ್ದ ಆಂಧ್ರ ಪ್ರದೇಶ ಮೂಲದ ಗುಂಪೊಂದು ನಿಮಗೆ ಪಾಠ ಕಲಿಸುವುದಾಗಿ ಎಚ್ಚರಿಕೆ ಕೊಟ್ಟು ತೆರಳಿದ್ದರು. ಹಂದಿ ವ್ಯಾಪಾರದ ವಿಚಾರದಲ್ಲಿ ಪರಸ್ಪರ ದ್ವೇಷವಿರಬಹುದೆಂಬ ಶಂಕೆ ನಾಯಕನಹಟ್ಟಿಯಲ್ಲಿ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳವಾರ ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ನಾಯಕನಹಟ್ಟಿ ಹೊರವಲಯದಲ್ಲಿರುವ ಹಂದಿ ಸಾಕಣೆ ಗುಡಿಸಲಿಗೆ ಏಕಾಏಕಿ ನುಗ್ಗಿದ್ದಾರೆ. ನಂತರ ಗುಡಿಸಲಿನ ಬಳಿ ಮಲಗಿದ್ದ ಮಾರೇಶನ ತಲೆ ಕಡಿದು ಕೊಲೆಗೈದಿದ್ದಾರೆ. ಅಂತೆಯೇ ತಂದೆಯೊಂದಿಗಿದ್ದ ಮಗ ಸೀನಪ್ಪ ಹಾಗೂ ಅಣ್ಣನ ಮಗನಾದ ಯಲ್ಲೇಶನ ಕಣ್ಣಿಗಳಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರ ಹಾಗೂ ಕಲ್ಲಿನಿಂದ ಕೊಲೆಗೈದಿದ್ದಾರೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಯಲ್ಲೇಶ್ ಗುಡಿಸಲಿನಿಂದ ದೂರ ಓಡಿಹೋಗಿದ್ದಾನೆ. ಆಗ ರಸ್ತೆ ಬದಿಯಲ್ಲೇ ಆತನನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾರೆ. ಮೂವರನ್ನು ಕೊಂದ ಬಳಿಕ 40ಕ್ಕೂ ಹೆಚ್ಚು ಹಂದಿಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಚಿತ್ರದುರ್ಗ ಎಸ್ಪಿ ಜಿ.ರಾಧಿಕಾ ಹಾಗೂ ಎಎಸ್ಪಿ ನಂದಗಾವಿ ಸೇರಿದಂತೆ ನಾಹಕನಹಟ್ಟಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಸ್ಥಳದಲ್ಲಿ ಶ್ವಾನದಳ, ಬೆರಳಚ್ಚು ತಜ್ಞರ ತಂಡದೊಂದಿಗೆ ತನಿಖೆ ಮುಂದುವರಿಸಿದ್ದಾರೆ. ಮೃತರ ಸಂಬಂಧಿಗಳ ಹೇಳಿಕೆ ಪಡೆದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.