ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಶಾಸಕ ರಘುಪತಿ ಪ್ರತಿಕ್ರಿಯಿಸಿದ್ದು ಆರು ಮಂದಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕದೆ ತರಗತಿಗೆ ಹಾಜರಾಗುವಂತೆ ಮನವಿ ಮಾಡಲಾಗುವುದು. ಇದಕ್ಕೆ ಒಪ್ಪದಿದ್ದರೆ ಅವರಿಗೆ ಆನ್ಲೈನ್ ತರಗತಿ ಮಾಡಿ ಪರೀಕ್ಷೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುವುದು. ಆದರೆ ಯಾವುದೇ ಕಾರಣಕ್ಕೂ ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದು ಉಡುಪಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸ್ಕಾರ್ಫ್ ವಿಚಾರವಾಗಿ ಸರಕಾರ ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿದ ಬೆನ್ನಲ್ಲೇ ಮಂಗಳವಾರ ಕಾಲೇಜು ಅಭಿವೃದ್ಧಿ ಸಮಿತಿ ನಡೆಸಿದ ಸಭೆಯ ಬಳಿಕ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ. ಬಾವ ನೇತೃತ್ವದಲ್ಲಿ ಮುಸ್ಲಿಮ್ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದರು ಆ ಬಳಿಕ ಕಾಲೇಜು ಅಭಿವೃದ್ಧಿ ಸಮಿತಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.
ಕಾಲೇಜಿನಲ್ಲಿ ಶಿಸ್ತು ಕಾಪಾಡುವುದು ಅತಿ ಮುಖ್ಯ. ಯಾರದ್ದೋ ಕುಮ್ಮಕ್ಕಿನಿಂದ ಪೋಷಕರು ಮಕ್ಕಳ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಹಾಗಾಗಿ ಕಾಲೇಜು ಮತ್ತು ಮಕ್ಕಳ ಭವಿಷ್ಯದ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳಿಗೆ ತಿಳಿಹೇಳಿ ಹಿಂದೆ ಇದ್ದ ಪದ್ಧತಿ ಮುಂದುವರೆಸಲು ಅವಕಾಶ ಕಲ್ಪಿಸಬೇಕು. ನಾವು ಯಾವುದೇ ಕಾರಣಕ್ಕೂ ಆ ಪದ್ಧತಿಯನ್ನು ಬದಲಾಯಿಸುವುದಿಲ್ಲ ಎಂದು ರಘುಪತಿ ಭಟ್ ಹೇಳಿದರು.