ಮಲ್ಪೆ: ಇಲ್ಲಿನ ಬೀಚ್ ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಸಂಭವಿಸಿದೆ.
ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಸಂತೋಷ್ ಹಾಗೂ ಮತ್ತೊಬ್ಬರನ್ನು ರಕ್ಷಿಸಲಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಇವರಿಬ್ಬರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಟುಂಬವೊಂದು ಹಾಸನದಿಂದ ಬೇಲೂರಿಗೆ ಪ್ರವಾಸಕ್ಕೆ ಬಂದಿದ್ದು, ಇದರಲ್ಲಿ ಮೂವರು ನೀರಿಗೆ ಇಳಿದಿದ್ದರು. ಅಲೆಗಳ ಜೊತೆ ಆಟವಾಡುತ್ತಿದ್ದಂತೆ ಅಲೆಗಳ ಆರ್ಭಟ ಹೆಚ್ಚಿದೆ. ಈ ಬಗ್ಗೆ ಅರಿವಿಲ್ಲದೇ ಮೂವರು ಪ್ರವಾಸಿಗರು ಕೂಡ ನೀರು ಪಾಲಾಗಿದ್ದರು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಮೂವರನ್ನು ರಕ್ಷಿಸಿ, ದಡಕ್ಕೆ ಕರೆ ತಂದಿದ್ದಾರೆ.
ಈ ಸಂದರ್ಭದಲ್ಲಿ ಮೂವರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಗಿರೀಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಇನ್ನಿಬ್ಬರನ್ನು ರಕ್ಷಿಸಿಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.