ತಿರುಪತಿ : ಸದ್ಯಕ್ಕಂತೂ ಕೋವಿಡ್ ಅಬ್ಬರ ತಣ್ಣಗಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ. ಇದೀಗ ಪ್ರಖ್ಯಾತ ದೇವಾಲಯಗಳಿಗೂ ತಟ್ಟಿದೆ ಕೊರೊನಾ ಬಿಸಿ. ತಿರುಪತಿ ತಿಮ್ಮಪ್ಪನನ್ನು ಬಿಟ್ಟಿಲ್ಲ ಈ ಹೆಮ್ಮಾರಿ.
ತಿರುಪತಿ ದೇವಸ್ಥಾನದ 140 ಮಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಿರುಪತಿಯನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯನ್ನು ಆಗಸ್ಟ್ 5ರವರೆಗೂ ಲಾಕ್ಡೌನ್ ಮಾಡುತ್ತಿರುವುದಾಗಿ ಸ್ಥಳೀಯ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಲಾಕ್ಡೌನ್ ಜಾರಿಯಾದರೂ ತಿರುಮಲ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಈಗಾಗಲೇ ಭಕ್ತರು ಬೇರೆ ಬೇರೆ ಸ್ಥಳಗಳಿಂದ ತಮ್ಮ ಸ್ವತಃ ವಾಹನದಲ್ಲಿ ಹೊರಟಿರುವ ಸಾಧ್ಯತೆ ಇದೆ. ಇಂತಹವರಿಗೆ ಸಮಸ್ಯೆಯಾಗದಂತೆ ಅವರಿಗೆ ತಿರುಪತಿಗೆ ಪ್ರವೇಶ ನೀಡದೆ ಬೈ-ಪಾಸ್ ರಸ್ತೆ ಮೂಲಕ ನೇರ ತಿರುಮಲಕ್ಕೆ ತೆರಳಲು ಅವಕಾಶ ನೀಡಲಾಗುವುದು ಎಂದು ಚಿತ್ತೂರು ಜಿಲ್ಲಾಧಿಕಾರಿ ನಾರಾಯಣ ಭರತ್ ಗುಪ್ತಾ ಹೇಳಿದ್ದಾರೆ.
ಕೊರೊನಾ ಆತಂಕದ ನಡುವೆಯೂ ತಿರುಮಲದಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇದುವರೆಗೂ 140 ಮಂದಿ ಟಿಟಿಡಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಉಳಿದಂತೆ ಲಡ್ಡು ಮಾಡುವ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 14 ಮಂದಿ ಸಹಾಯಕ ಅರ್ಚಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 140 ಮಂದಿ ಸೋಂಕಿತರಲ್ಲಿ ಇದುವರೆಗೂ ಕೊರೊನಾಗೆ ಚಿಕಿತ್ಸೆ ಪಡೆದುಕೊಂಡು 70 ಮಂದಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿದಿನ ಸುಮಾರು 12 ಸಾವಿರ ಮಂದಿ ದೇವರ ದರ್ಶನ ಪಡೆಯುತ್ತಿದ್ದಾರೆ.