ದೊಡ್ಡಬಳ್ಳಾಪುರ: ಬಿಜೆಪಿ ರಾಜ್ಯ ಸರಕಾರದ 3 ವರ್ಷಗಳ ಸಾರ್ಥಕ ಸೇವೆ ಮತ್ತು ಸಬಲೀಕರಣದ ಕಾರ್ಯದ ಹಿನ್ನೆಲೆಯಲ್ಲಿ ನಾಳೆ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶ ನಡೆಯಲಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೆ ಸುಧಾಕರ್ ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ತುಮಕೂರಿನ ಕೆಲವು ತಾಲೂಕುಗಳಿಂದ ಜನರು ಬರಲಿದ್ದು, ಬಿಜೆಪಿಯ ದೊಡ್ಡ ಜನಸಭೆ ಇದಾಗಲಿದೆ. ರಾಜ್ಯದ ಆರು ವಲಯಗಳಲ್ಲಿ ಇಂಥ ಜನಸಭೆ ಏರ್ಪಡಿಸಲಾಗುವುದು. ಈ ಭಾಗದಲ್ಲಿ ಬಿಜೆಪಿಯ ಶಕ್ತಿಯನ್ನು ಪ್ರಶ್ನಿಸುವವರಿಗೆ ಇದು ಉತ್ತರ ನೀಡಲಿದೆ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಭಾಗಿಯಾಗುವ 3 ಲಕ್ಷ ಜನರಿಗೆ ಊಟ ಸಿದ್ಧವಾಗುತ್ತಿದೆ. ವೆಜಿಟೇಬಲ್ ಪಲಾವ್, ಮೊಸರನ್ನ, ಬಾದುಷಾ ಸಿಹಿತಿಂಡಿ ನೀಡಲಾಗುತ್ತದೆ. ವಾಹನ ನಿಲುಗಡೆಗೆ 200 ಎಕರೆಗೂ ಹೆಚ್ಚಿನ ವಿಸ್ತೀರ್ಣದಲ್ಲಿ 12 ಕಡೆ ಜಾಗಗಳನ್ನು ಗುರುತಿಸಲಾಗಿದೆ. ಟ್ರಾಫಿಕ್ ಜಾಮ್ ಆಗದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೊಲೀಸ್ ಅಧಿಕಾರಿಗಳ ಜೊತೆ ವಿಶೇಷ ಸಭೆ ಮಾಡಿದ್ದು, ಮನವಿ ಮಾಡಿದ್ದೇವೆ ಎಂದಿದ್ದಾರೆ.
ಕಾರ್ಯಕ್ರಮ ಮುಂದೂಡಿದರೂ ಸ್ಥಳೀಯ ನಾಯಕರು ಗರಿಷ್ಠ ಸಹಕಾರ ಕೊಡುತ್ತಿದ್ದಾರೆ. 5 ಸಾವಿರ ಬಸ್ಗಳನ್ನು ಈಗ ನಿಗದಿಪಡಿಸಲಾಗಿದೆ. ಈ ಎಲ್ಲ ನಾಯಕರಿಗೆ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ದ್ವಿಚಕ್ರ- ಚತುಷ್ಚಕ್ರ ವಾಹನಗಳು ಬರಲಿವೆ ಎಂದರು. 12 ಗಂಟೆಗೆ ಸಭೆ ಇದ್ದರೂ 10 ಗಂಟೆಯೊಳಗೆ ಬಂದು ಆಸೀನರಾಗುವಂತೆ ಅವರು ಮನವಿ ಮಾಡಿದ್ದಾರೆ.