ಮಂಗಳೂರು: ಕೆಪಿಎಸ್ ಸಿ ಪರೀಕ್ಷಾ ಕೇಂದ್ರದಲ್ಲಿ ಒಳ ಪ್ರವೇಶಿಸುವ ಮುನ್ನ ಪರೀಕ್ಷಾರ್ಥಿಗಳನ್ನು ತಪಾಸಣೆಗೆ ಸಣ್ಣ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ರಾಜ್ಯ ಲೆಕ್ಕಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಇಂದು ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆ ನಡೆಸಿತ್ತು.ಬಲ್ಮಠ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಸಣ್ಣ ವಿದ್ಯಾರ್ಥಿಗಳನ್ನು ತಪಾಸಣೆಗೆ ಬಳಸಿಕೊಳ್ಳಲಾಗಿದ್ದು,
ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳನ್ನು ವಿದ್ಯಾರ್ಥಿಗಳು ತಪಾಸಣೆ ಮಾಡಿದ್ದಾರೆ.
ಇದರಿಂದಾಗಿ ಮೊಬೈಲ್ ಜಾಮರ್, ಮೆಟಲ್ ಡಿಟೆಕ್ಟರ್, ಬಯೋ ಮೆಟ್ರಿಕ್ ಫೇಸ್ ಡಿಟೆಕ್ಷನ್ ಹಾಗೂ ಬಾಡಿ ಕ್ಯಾಮರಾ ಬಳಕೆಗೆ ಕೆಪಿಎಸ್ ಸಿ ಸೂಚನೆ ಇದ್ದರೂ ಸೂಕ್ತ ರೀತಿಯಲ್ಲಿ ತಪಾಸಣೆ ನಡೆಯದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸಿದ್ದಾರೆ.
ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಏಳೆಂಟು ವಿದ್ಯಾರ್ಥಿಗಳು ಮೆಟಲ್ ಡಿಟೆಕ್ಟರ್ ಹಿಡಿದು ಅಭ್ಯರ್ಥಿಗಳನ್ನು ತಪಾಸಣೆ ನಡೆಸಿದ್ದು, ಏಜೆನ್ಸಿ ಮೂಲಕ ತಪಾಸಣೆಗೆ ನಿಯೋಜಿಸಲ್ಪಟ್ಟಿದ್ದರು ಎಂದು ಹೇಳಲಾಗಿದೆ.
ಬಲ್ಮಠ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿ ಮಂಗಳೂರಿನ ಮೂರು ಕೇಂದ್ರಗಳಲ್ಲಿ ಇಂದು ಕೆಪಿಎಸ್ ಸಿ ಪರೀಕ್ಷೆ ನಡೆದಿದೆ.