ಪುತ್ತೂರು: ಎಲ್ಲಾ ಅಂದುಕೊಂಡ ಆಗಿದ್ದರೆ ನಿನ್ನೆ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಬೇಕಿತ್ತು. ಆದರೆ ಬಿಜೆಪಿಯಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರಿನ ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದು, ನಿನ್ನೆ ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸದಸ್ಯತ್ವ ಪಡೆದುಕೊಳ್ಳುವ ಕಾರ್ಯಕ್ರಮ ರದ್ದಾಗಿದೆ.
ಶುಕ್ರವಾರ ಮಂಗಳೂರಿನಲ್ಲಿ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರು ಬಿಜೆಪಿ ಮುಖಂಡರಿಂದಲೇ ವಿರೋಧ ವ್ಯಕ್ತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸುದ್ದಿಗೋಷ್ಠಿಗೆ ಹಾಜರಾಗದೆ ಸಂಜೆ ನೇರವಾಗಿ ಪುತ್ತೂರಿಗೆ ದೌಡಾಯಿಸಿದ್ದರು. ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಮುಚ್ಚಿದ ಬಾಗಿಲ ಮಾತುಕತೆ ನಡೆಸಬೇಕಾಯಿತು. ಸಂಜೆ 6ರಿಂದ ರಾತ್ರಿ 8 ಗಂಟೆ ವರೆಗೆ ಪುತ್ತಿಲ ಸೇರ್ಪಡೆ ವಿಚಾರದಲ್ಲಿ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ.
ಸಭೆಯಲ್ಲಿ ಯಾವುದೇ ಕಾರಣಕ್ಕೂ ಅರುಣ್ ಕುಮಾರ್ ಪುತ್ತಿಲ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಬಾರದು ಬೇಕಾದರೆ ಹೊರಗಿನಿಂದ ಬೆಂಬಲ ನೀಡಲಿ ಎಂಬ ಬಲವಾದ ಆಗ್ರಹ ಕೆಲವು ಮುಖಂಡರಿಂದ ವ್ಯಕ್ತಗೊಂಡಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಆರ್.ಎಸ್.ಎಸ್ ಮುಖಂಡರ ನೇತೃತ್ವದಲ್ಲಿ ಮಾರ್ಚ್ 16ರಂದು ಪುತ್ತೂರಿನಲ್ಲಿ ಸಂಘಪರಿವಾರದ ತುರ್ತು ಬೈಠಕ್ ನಡೆಯಲಿದೆ ಎಂದು ಹೇಳಲಾಗಿದೆ. ಈ ಬೈಠಕ್ನಲ್ಲಿ ಜಿಲ್ಲಾಧ್ಯಕ್ಷರ ಸಹಿತ ಮಂಡಲ, ನಗರ ಹಾಗೂ ಇತರೆ ಪದಾಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಪುತ್ತಿಲ ಪರಿವಾರ ಪ್ರತ್ಯೇಕವಾಗಿಯೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಲಿ, ಲೋಕಸಭಾ ಚುನಾವಣೆ ಬಳಿಕ ಮುಂದೆ ಪಕ್ಷ ಸೇರ್ಪಡೆ ಬಗ್ಗೆ ಪರಿಶೀಲಿಸಿದರೆ ಒಳಿತು ಎಂಬ ನಿರ್ಧಾರಕ್ಕೆ ಬರುವ ಬಗ್ಗೆ ಸ್ಥಳೀಯ ಮುಖಂಡರು ಅಭಿಪ್ರಾಯಿಸುವ ಸಾಧ್ಯತೆಯನ್ನು ಹೇಳಲಾಗಿದೆ.
ಈ ನಡುವೆ ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿದ್ದು ನಾವಲ್ಲ ಅದು ಮಾಧ್ಯಮದವರು ಎಂದು ಹೇಳಿ ನೀಡುವ ಮೂಲಕ ಉಲ್ಟಾ ಹೊಡೆದಿದ್ದರು.ಒಟ್ಟಿನಲ್ಲಿ ಇಂದು ಎಲ್ಲಾ ಬೆಳವಣಿಗೆಗಳು ಆಗುತ್ತವೆ ಅನ್ನೋದನ್ನು ಕಾದು ನೋಡ್ಬೇಕು