ಬೆಂಗಳೂರು: ಹೊಸ ಸರ್ಕಾರ ರಚನೆಯಾಗಿ 48 ಗಂಟೆ ಕಳೆಯುವ ಮುನ್ನವೇ ಅಸಮಾಧಾನ ಭುಗಿಲೆದ್ದು ಸಚಿವರ ಸಿಟ್ಟು ಸ್ಫೋಟಗೊಳ್ಳುತ್ತಿದೆ. ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಇಂದು ಬೆಳಗ್ಗೆ ರಾಜೀನಾಮೆ ನೀಡಿದ್ದು, ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಇದೇ ವೇಳೆ ಅಹಾರ ಖಾತೆಯನ್ನು ಪಡೆದಿರುವ ಸಚಿವ ಕೆ.ಹೆಚ್. ಮುನಿಯಪ್ಪ ಖಾತೆ ಬದಲಾವಣೆ ಮಾಡಿದ್ದರೆ ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನೂ ಭೇಟಿ ಮಾಡಿ ತಮ್ಮ ಆಕ್ಷೇಪವನ್ನು ಮುನಿಯಪ್ಪ ವ್ಯಕ್ತಪಡಿಸಿದ್ದಾರೆ. ಆಹಾರ ಖಾತೆಯ ಬದಲಾಗಿ ಮುನಿಯಪ್ಪ ಸಮಾಜ ಕಲ್ಯಾಣ ಇಲಾಖೆಯನ್ನು ಬಯಸಿದ್ದಾರೆ ಎನ್ನಲಾಗಿದೆ.
ಇನ್ನು ಇಂಧನ ಖಾತೆ ಪಡೆದಿರುವ ಸಚಿವ ಕೆ.ಜೆ. ಜಾರ್ಜ್ ಕೆಪಿಸಿಎಲ್ ಎಂಡಿ ಆಗಿ ಸಿದ್ಧರಾಮಯ್ಯ ಸರ್ಕಾರದಲ್ಲಿ ಡಿಸಿಎಂ ಕಾರ್ಯದರ್ಶಿ ಆಗಿದ್ದ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ಅವರನ್ನು ನೇಮಕ ಮಾಡಿರುವುದಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದೆ ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗಿದೆ.
ಈ ಮಧ್ಯೆ ಸಚಿವ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಿಂದಿನ ಲೋಕೋಪಯೋಗಿ ಇಲಾಖೆಯನ್ನೇ ನೀಡಲಾಗಿದ್ದು, ತಾವು ಅಸಮಾಧಾನವೂ ಆಗಿಲ್ಲ, ಸಂತೋಷವೂ ಆಗಿಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ.


