ಮಂಗಳೂರು : ಲಾಕ್ ಡೌನ್ ಬಳಿಕ ದುಬೈಯಿಂದ ಎರಡನೇ ವಿಮಾನ ಇಂದು ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಗಲ್ಫ್ ರಾಷ್ಟ್ರದಿಂದ ಸುಮಾರು 178 ಪ್ರಯಾಣಿಕರನ್ನು ಪ್ರಯಾಣಿಸಿದ ವಿಮಾನ ಸಂಜೆ 7.55 ಕ್ಕೆ ಮಂಗಳೂರಿಗೆ ತಲುಪಿದೆ.
ಮೇ.12 ರಂದು ಬಂದಿಳಿದ ಮೊದಲನೇ ವಿಮಾನದ ಪ್ರಯಾಣಿಕರು ಪಟ್ಟಕಷ್ಟದಿಂದ ಎಚ್ಚೆತ್ತ ಜಿಲ್ಲಾಡಳಿತ ಈ ಬಾರಿ ಪ್ರಯಾಣಿಕರಿಗೆ ಇಳಿದ ನಂತರ ವಿಮಾನ ನಿಲ್ದಾಣದಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಿತ್ತು. ನಂತರ ಆರೋಗ್ಯ ಇಲಾಖೆಯ ತಪಾಸಣಾ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಲಾಯಿತು. ಪ್ರಯಾಣಿಕರಿಗೆ ಊಟದ ವ್ಯವಸ್ಥೆಯನ್ನೂ ಏರ್ಪಡಿಸಲಾಗಿತ್ತು.
ಪ್ರಯಾಣಿಕರನ್ನು ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತ ಬಸ್ಸಿನಲ್ಲಿ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ವಿದೇಶದಿಂದ ಆಗಮಿಸಿದವರ ಗಂಟಲ ದ್ರವ ಪರೀಕ್ಷೆ ಮಂಗಳವಾರ ನಡೆಯಲಿದೆ.
ವಿಮಾನ ಆಗಮನ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ, ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ. ರಾವ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.