ಉಡುಪಿ: ಕೆಲದಿನಗಳ ಹಿಂದೆ ಕೋವಿಡ್ ಮಾರ್ಗಸೂಚಿಗಳನ್ನು ಸಾರ್ವಜನಿಕರು ಸರಿಯಾಗಿ ಪಾಲನೆ ಮಾಡುತ್ತಿಲ್ಲ ಎಂದು ಬಸ್ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಬಸ್ನಿಂದ ಕೆಳಗಿಸಿ ಬೇರೊಂದು ಬಸ್ ನಲ್ಲಿ ಕಳುಹಿಸಿದ್ದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಇದೀಗ ತಾವೇ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಮಾಸ್ಕ್ ಧರಿಸದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಿಗಳಿಗೊಂದು ನ್ಯಾಯವೇ ಎಂದು ಜನರು ಪ್ರಶ್ನೆ ಮಾಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಗುತ್ತಿದ್ದಂತೆ, ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟನೆ ನೀಡಿದ್ದು, ಇದೊಂದು ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮವೇ ಹೊರತು ಸಾರ್ವಜನಿಕ ಕಾರ್ಯಕ್ರಮ ಅಲ್ಲ. ನನ್ನ ಮನೆಯ ಪಕ್ಕದಲ್ಲಿರುವ ಹೆಚ್ಚುವರಿ ಎಸ್ಪಿ ಮನೆಯಲ್ಲಿ ಅವರ ಮಗಳ ಮೆಹಂದಿ ಕಾರ್ಯಕ್ರಮವನ್ನು ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಕೇವಲ ಕುಟುಂಬಕ್ಕೆ ಹತ್ತಿರವಾಗಿದ್ದವರನ್ನು ಮಾತ್ರ ಆಹ್ವಾನಿಸಲಾಗಿತ್ತು. ಅದು ಸಾರ್ವಜನಿಕ ಸ್ಥಳ ಅಲ್ಲ ಆದ್ದರಿಂದ ಮಾಸ್ಕ್ ಧರಿಸಬೇಕೆಂಬುದು ಕಡ್ಡಾಯ ಅಲ್ಲ. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕಾಗಿರುವುದು ಸಾರ್ವಜನಿಕ ಸ್ಥಳದಲ್ಲಿ ಮಾತ್ರ ಎಂದು ಸ್ಪಷ್ಟನೆ ನೀಡಿದರು.