
ಉಡುಪಿ: ಪ್ರೀತಿ ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ಚಾಕುವಿನಿಂದ ಇರಿದ ಘಟನೆ ಮಣಿಪಾಲದ ಶಾಂತಿನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಯೋಗೀತಾ (23) ಚಾಕು ಇರಿತಕ್ಕೊಳಗಾದ ಯುವತಿ.
ಯೋಗಿತಾ ಶಾಂತಿನಗರದ ಐಡಿಯಲ್ ಬಿಲ್ಡಿಂಗ್ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದರು. ಆರೋಪಿಯು ಕಳೆದ ಕೆಲವು ಸಮಯದಿಂದ ಯೋಗೀತಾ ಅವರನ್ನು ಪ್ರೀತಿಸುತ್ತಿರುವುದಾಗಿ ಬೆನ್ನು ಬಿದ್ದಿದ್ದ ಎನ್ನಲಾಗಿದೆ. ಆದರೆ ಯೋಗೀತಾ ಆತನ ಪ್ರೀತಿಯನ್ನು ನಿರಾಕರಿಸಿದ್ದರು.
ಇದರಿಂದ ಕುಪಿತಗೊಂಡ ಆರೋಪಿ ಮಂಗಳವಾರ ರಾತ್ರಿ ಯೋಗೀತಾ ಅವರಿದ್ದ ಪಿಜಿ ಬಳಿ ಬಂದು ಚೂರಿಯಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


