ಬೈಂದೂರು: ಈ ಬಾರಿಯ ಗಡಿ ಭದ್ರತಾ ಪಡೆ (ಬಿಎಸ್ಎಫ್) ನೇಮಕಾತಿಯಲ್ಲಿ ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಬೈಂದೂರು ತಾಲೂಕಿನ ಯಳಜಿತ್ ಗ್ರಾಮದ ಹುಣ್ಸೆಮಕ್ಕಿ ನಿವಾಸಿ ವಿದ್ಯಾ ಗೌಡ ಪ್ರಸಕ್ತ ಸಾಲಿನಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಲಿದ್ದಾರೆ.
ಇವರು ಇಂದು (ಎಪ್ರಿಲ್ 01) ಮಧ್ಯಪ್ರದೇಶದ ಗ್ವಾಲಿಯರ್ ನ ತೇಕನ್ಪುರ್ ಎಂಬಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎನ್ನಲಾಗಿದೆ.
ಇವರು ಕಾಲೇಜು ದಿನಗಳಲ್ಲಿ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಉತ್ತಮ ಸಾಧನೆಗೈದಿದ್ದಾರೆ. ವಿವಿಧ ವಿಭಾಗಗಳಲ್ಲಿ ಚಾಂಪಿಯನ್ ಕೂಡ ಆಗಿದ್ದಾರೆ. ನೆಟ್ಬಾಲ್ನಲ್ಲಿ ಐದು ಬಾರಿ ರಾಜ್ಯಮಟ್ಟ, ಒಂದು ಬಾರಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅಥ್ಲೆಟಿಕ್ಸ್ ನಲ್ಲಿ 6 ಬಾರಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ. ಪೋಲ್ ವಾಲ್ಟ್ ನಲ್ಲಿ ಕಂಚಿನ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ, ಕ್ರೀಡಾ ಕ್ಷೇತ್ರದಲ್ಲಿ ಸಾಧಕರಿಗೆ ಕ್ರೀಡಾ ಇಲಾಖೆ ನೀಡುವ ಚೈತ್ರದ ಚಿಗುರು ರಾಜ್ಯ ಪ್ರಶಸ್ತಿ ದೊರೆತಿದೆ.