
ಉಡುಪಿ: ಉಮರ್ ಖಾಲಿದ್ ಪರವಾಗಿ ಘೋಷಣೆ ಕೂಗಿ, ಫ್ಲೆಕ್ಸ್ ಪ್ರದರ್ಶಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಬೆಂಬಲಿತ ಹೋರಾಟದಲ್ಲಿ ಉಮರ್ ಖಾಲಿದ್ ಪರ ಫ್ಲೆಕ್ಸ್ ಪ್ರತ್ಯಕ್ಷವಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಿದೆ. ಅಫ್ಜಲ್ ಗುರು ಪರವೂ ಹೋರಾಡಿದ್ದ ದೇಶದ್ರೋಹಿ ಉಮರ್ ಖಾಲಿದ್ಗೆ ಸುಪ್ರೀಂ ಕೋರ್ಟ್ ಕೂಡ ಜಾಮೀನು ನೀಡಲು ನಿರಾಕರಿಸಿದೆ. ಇಂತಹ ವ್ಯಕ್ತಿಯನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ನೇರವಾಗಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ” ಎಂದು ಆರೋಪಿಸಿದರು.
ಇದೇ ವೇಳೆ ಗೃಹ ಸಚಿವರನ್ನು ಉದ್ದೇಶಿಸಿ ಮಾತನಾಡಿ, “ಪ್ರತಿಭಟನಾಕಾರರು ಪೋಲಿಸರನ್ನೇ ಕೆಟ್ಟ ಪದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ. ಇದೆಲ್ಲವನ್ನೂ ನೋಡಿದರೆ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ಪರ ಕೆಲಸ ಮಾಡುತ್ತಿರುವುದು ಸ್ಪಷ್ಟವಾಗುತ್ತದೆ” ಎಂದು ಕಿಡಿಕಾರಿದರು.


