ನವದೆಹಲಿ: ಪಶ್ಚಿಮ ಘಟ್ಟ ಸೂಕ್ಷ್ಮ ವಲಯ ಕುರಿತು ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ಸದ್ಯಕ್ಕೆ ತಡೆ ಹಿಡಿಯಲಾಗಿದೆ.
ಕಸ್ತೂರಿ ರಂಗನ್ ವರದಿಯ ಬಗ್ಗೆ ಪುನರ್ ಪರೀಶಿಸಲು ತಜ್ಞರ ಸಮಿತಿ ನೇಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯದ ನಿಯೋಗ ಇಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ್ದ ವೇಳೆ ಈ ಆಶ್ವಾಸನೆ ನೀಡಿದ್ದಾರೆ.
ನಿಯೋಗದ ನೇತೃತ್ವ ವಹಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿದ್ದ ಅಧಿಸೂಚನೆಯಿಂದ ಜನಜೀವನದ ಮೇಲಾಗುವ ಆರ್ಥಿಕ ಪ್ರತಿಕೂಲಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ.
ನಿಯೋಗದ ಸದಸ್ಯರ ಮನವಿ ಮೇರೆಗೆ ಅಧಿಸೂಚನೆ ತಡೆ ಹಿಡಿದಿದ್ದು, ತಜ್ಞರ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಯಾದವ್ ಭರವಸೆ ನೀಡಿದ್ದಾರೆ.
ಕೇಂದ್ರ ಪರಿಸರ ಸಚಿವಾಲಯದ ಮಾಜಿ ಕಾರ್ಯದರ್ಶಿ ಸಂಜೀವ್ ಕುಮಾರ್ ನೇತೃತ್ವದ ತಜ್ಞರ ತಂಡ, ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶ ವಲಯದಲ್ಲಿ ಸರ್ವೇ ಕಾರ್ಯ ಹಾಗೂ ಜನಸಂಪರ್ಕ ಹಾಗೂ ಸಂವಾದ ನಡೆಸಲಿದೆ.
ನಿಯೋಗದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.