ಮಂಗಳೂರು; ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು , ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು 20 ಗಂಟೆಯೊಳಗೆ ಉರ್ವ ಪೊಲೀಸರು ಬಂಧಿಸಿದ್ದಾರೆ.ಅಸ್ಸಾಂನ ಕಾಚಾರ್ ಜಿಲ್ಲೆಯ ಅಭಿಜಿತ್ ದಾಸ್ (24) , ಅದೇ ಜಿಲ್ಲೆಯವನಾದ ದೇಬಾ ದಾಸ್ (21 ) ಬಂಧಿತರು.
ಪ್ರಕರಣದ ವಿವರ:
ದಿನಾಂಕ 19/20-10-2025 ರಂದು ರಾತ್ರಿ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲ್ ಗ್ರಾಮ ಲಾಲ್ ಬಾಗ್ ಹ್ಯಾಟ್ ಹಿಲ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿರುವ 03 ಫ್ಲಾಟ್ ಗಳಿಗೆ ನುಗ್ಗಿದ ಕಳ್ಳರು ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು, ರೂ 5000/- ನಗದು ಹಣ, 3000 Dirham ಹಾಗೂ ಮೊಬೈಲ್ ಫೋನ್ ನ್ನು ಕಳ್ಳತನ ಮಾಡಿರುವ ಬಗ್ಗೆ ರಿಯಾಜ್ ರಶೀದ್ ಎಂಬವರು ನೀಡಿದ ದೂರಿನ ಮೇರೆಗೆ ದಿನಾಂಕ 20-10-2025 ರಂದು ಬೆಳಿಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಉರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಸಿಬ್ಬಂದಿಯವರು ಹಾಗೂ ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ತಜ್ಞರ ತಂಡವು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಆರೋಪಿ ಪತ್ತೆ ಕಾರ್ಯವನ್ನು ನಡೆಸಿದ್ದು, ಪ್ರಕರಣ ದಾಖಲಾಗಿ ಸುಮಾರು 20 ಗಂಟೆಗಳ ಒಳಗಾಗಿ ಶೀಘ್ರ ಕಾರ್ಯ ಪ್ರವೃತ್ತರಾಗಿ, ಮನೆಗಳ ಕನ್ನ ಕಳವು ಗಳಲ್ಲಿ ಭಾಗಿಯಾಗಿದ್ದ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ದಿನಾಂಕ 21-10-2025 ರ ಬೆಳಗಿನ ಜಾವ ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಆರೋಪಿಗಳಿಂದ ಪ್ರಕರಣದಲ್ಲಿ ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳನ್ನು, ರೂ 5000/- ನಗದು ಹಣ, ರೂ 70,000/- ಬೆಲೆಯ 3000 Dirham ಹಾಗೂ ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ ಈ ಮೊದಲು ಬೆಂಗಳೂರು ನಗರ ಮತ್ತು ಅಸ್ಸಾಂ ಸೇರಿದಂತೆ ಹಲವು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತವೆ. ಮೇಲಾಧಿಕಾರಿಗಳ ನಿರ್ದೇಶನದಂತೆ, ಉರ್ವಾ ಪೊಲೀಸರ ತಂಡವು ಬೆಂಗಳೂರಿನಲ್ಲಿ ಸದ್ರಿ ಆರೋಪಿಗಳನ್ನು ದಿನಾಂಕ 21-10-2025 ರಂದು ಬೆಳಗ್ಗಿನ ಜಾವ ಬೆಂಗಳೂರು ನಗರ ಪೊಲೀಸ್ ರವರ ಸಹಕಾರದಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಮುಂದಿನ ಹೆಚ್ಚಿನ ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುವುದು ಮತ್ತು ಇತರೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆಗೆ ಒಳಪಡಿಸಲಾಗುವುದು.
ಈ ಕಾರ್ಯಾಚರಣೆಯನ್ನು ಡಿಸಿಪಿ Crime ರವರ ಮೇಲ್ವಿಚಾರಣೆಯಲ್ಲಿ ಕೇಂದ್ರ ಉಪ ವಿಭಾಗದ ಎಸಿಪಿ, ಪಿ.ಐ, ಉರ್ವ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತದೆ.


