ಪುತ್ತೂರು: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ಆಧುನಿಕ ಸಿಟಿ ಸ್ಕ್ಯಾನ್ ಯಂತ್ರವನ್ನು ಹಸ್ತಾಂತರಿಸಿದ್ದಾರೆ.

ಸುಮಾರು ಎರಡು ಕೋಟಿ ವೆಚ್ಚದ ಈ ಯಂತ್ರ ಪುತ್ತೂರು ಹಾಗೂ ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದು, ಸಂಪೂರ್ಣ ಸುರಕ್ಷಾ ವಿಮೆ ಯೋಜನೆಯನ್ನೂ ಆರಂಭಿಸಿದೆ. ಈಗಾಗಲೇ 7.85 ಲಕ್ಷ ಜನ ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ರಾಜ್ಯದ ಸುಮಾರು 642 ಆಸ್ಪತ್ರೆಗಳಲ್ಲಿ ವಿಮಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನಾಲ್ಕು ಇಂತಹ ಅತ್ಯಾಧುನಿಕ ಸಿಟಿ ಸ್ಕ್ಯಾನ್ ಯಂತ್ರವನ್ನು ವಿತರಿಸಲಾಗುತ್ತಿದ್ದು, ಇನ್ನುಳಿದ ಮೂರನ್ನು ಕಾಸರಗೋಡು, ಚೆನ್ನರಾಯಪಟ್ಟಣ ಮತ್ತು ಎಸ್.ಡಿ.ಎಂ ಆಸ್ಪತ್ರೆಗೆ ನೀಡಲಾಗಿದೆ ಅವರು ಹೇಳಿದ್ದಾರೆ.