ಬೆಂಗಳೂರು: ವಿಧಾನ ಪರಿಷತ್ ಅಖಾಡಕ್ಕೆ ಇಳಿದಿದ್ದ ಎಲ್ಲಾ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೂನ್ 29 ರಂದು ಮೇಲ್ಮನೆಗೆ ಚುನಾವಣೆ ನಡೆಯಬೇಕಿತ್ತು, ಆದರೆ ಸ್ಪರ್ಧಾ ಕಣದಲ್ಲಿ ಪ್ರತಿಸ್ಪರ್ಧಿಯಿರದ ಹಿನ್ನೆಲೆಯಲ್ಲಿ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಪರಿಷತ್ ಪ್ರವೇಶ ಮಾಡಿದ್ದಾರೆ.
ಬಿಜೆಪಿಯಿಂದ ಪ್ರತಾಪ್ ಸಿಂಹ ನಾಯಕ್, ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಕಾಂಗ್ರೆಸ್ನಿಂದ ಬಿ.ಕೆ.ಹರಿಪ್ರಸಾದ್, ನಸೀರ್ ಅಹಮ್ಮದ್, ಜೆಡಿಎಸ್ನ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಇಬ್ಬರು ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಆದರೆ ಸೂಚಕರಿಲ್ಲದ ಕಾರಣ ಇವರ ನಾಮಪತ್ರ ತಿರಸ್ಕೃತಗೊಂಡಿದೆ.
ವಿಧಾನ ಪರಿಷತ್ ಚುನಾವಣೆಗೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನದವರೆಗೂ ಕಾಲಾವಕಾಶ ವಿತ್ತು. ಅಂತಿಮವಾಗಿ ಕಣದಲ್ಲಿ ಉಳಿದಿದ್ದ ಮೂರು ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೊನೆ ಗಳಿಗೆವರೆಗೂ ಯಾರು ನಾಮ ಪತ್ರ ವಾಪಸ್ಸು ಪಡೆಯಲಿಲ್ಲ. ಜೂ.19ರಂದು ನಡೆದ ನಾಮಪತ್ರಗಳ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳ ನಾಮ ಪತ್ರಗಳು ತಿರಸ್ಕøತಗೊಂಡಿದ್ದವು.
ಹೀಗಾಗಿ ರಾಜ್ಯಸಭೆ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಅವಿರೋಧ ಆಯ್ಕೆಯಾಗಿದೆ.
ನಾಳೆ ನಿವೃತ್ತಿ:
ವಿಧಾನ ಪರಿಷತ್ಗೆ ಸರ್ಕಾರದಿಂದ ನಾಮ ನಿರ್ದೇಶಿತಗೊಂಡಿದ್ದ ಕೆ.ಅಬ್ದುಲ್ ಜಬ್ಬಾರ್, ಡಾ.ಜೈಮಾಲ ರಾಮಚಂದ್ರ, ಐವಾನ್ ಡಿಸೋಜ, ಇಕ್ಬಾಲ್ ಅಹ್ಮದ್ ಸರಡಗಿ ಹಾಗೂ ತಿಪ್ಪಣ್ಣ ಕಮಕನೂರ ಮೇಲ್ಮನೆ ಸದಸ್ಯ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ. ಈ ಐವರು ನಿವೃತ್ತಿಯಿಂದ ತೆರವಾಗುವ ಸ್ಥಾನಗಳಿಗೆ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಿದೆ.
