ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ರಾಡಿ ಗ್ರಾಮದ ಅತ್ರಿಜಾಲುನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್ (35) ಹಾಗೂ ಅವರ ಪುತ್ರಿ ತ್ರಿಶಾ ಹಾಗೂ ಅವರ ಪತ್ನಿ ಆಶಾ (30) ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಸೋಮವಾರ ಮನೆಯೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು. ತ್ರಿಶಾ ಸೋಮವಾರ ರಾತ್ರಿಯೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ. ಚೇತನ್ ಅವರು ಮಂಗಳವಾರ ಬೆಳಿಗ್ಗೆ ಸಾವನ್ನಪ್ಪಿದ್ದು , ನಂತರ ಅವರ ಪತ್ನಿ ಆಶಾ ಕೂಡ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇವರ ಆತ್ಮಹತ್ಯೆಗೆ ಕುಟುಂಬದ ಒಳಗಿನ ಸಮಸ್ಯೆಯೇ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಮೃತ ಚೇತನ್ ಅವರು ತಮ್ಮ ಡೈರಿಯಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಬರೆದಿರುವುದಾಗಿ ತಿಳಿದುಬಂದಿದೆ.
ಅಡಿಕೆ ಮಾರಿದ ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ನಡುವೆ ವಿವಾದ ಸೃಷ್ಟಿಯಾಗಿತ್ತು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಆಸ್ತಿಯನ್ನು ಪಾಲು ಮಾಡಲು ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಆದರೆ ಆಸ್ತಿ ಪಾಲು ಮಾಡುವುದಕ್ಕೂ ಮೊದಲೇ ಚೇತನ್ ತನ್ನ ಕುಟುಂಬದೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.