ಉಡುಪಿ: ನಾಡಿನ ಪ್ರಮುಖ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ(84) ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪಸೂಚಕ ಸೂಚಿಸಿದ್ದಾರೆ. ವೇದ ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು, ಅಸಂಖ್ಯ ಬರಹಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅವರ ನಿಧನದಿಂದ ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬದವರು ಮತ್ತು ಅಸಂಖ್ಯ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಡಾ. ಬನ್ನಂಜೆ ಗೋವಿಂದಾಚಾರ್ಯರು ಕನ್ನಡ ಹಾಗೂ ಸಂಸ್ಕೃತ ಭಾಷೆಯಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಪದ್ಮಶ್ರೀ ಪುರಸ್ಕೃತರಾಗಿದ್ದ ಅವರು ಆಧ್ಯಾತ್ಮಿಕ ವಿಷಯಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು.