ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹಾಗೂ ಪೂರ್ವವಲಯದ ಮೋಡಗಳ ಚಲನೆ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಧ್ಯಾಹ್ನದ ವೇಳೆಗೆ ಮಳೆ ಸುರಿಯುತ್ತಿದೆ. ಇದೀಗ ರಾಜ್ಯ ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಜ.8 ಮತ್ತು ಜ.9ಕ್ಕೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 64.5 ಮಿ.ಮೀನಿಂದ 115.5 ಮಿ.ಮೀನವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಇರುವುದರಿಂದ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಗುರುವಾರ ಸಹ ಹಲವೆಡೆ ಭಾರೀ ಮಳೆಯಾಗಿರುವುದು ವರದಿಯಾಗಿದೆ.
ಮಳೆ ಹಿನ್ನೆಲೆಯಲ್ಲಿ ಮಲೆನಾಡು, ಕರಾವಳಿ ಭಾಗದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಯಾಕಂದರೆ ಗೇರು, ಮಾವಿನ ಗಿಡಗಳು ಹೂವು ಬಿಡುವ ಸಮಯವಾಗಿದೆ. ಆದರೆ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಫಸಲಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಇನ್ನು, ಅಡಿಕೆ, ಭತ್ತ ಫಸಲು ಕೊಯ್ಲಿನ ಸಮಯ ಕೂಡ ಇದಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜ.12ರ ವರೆಗೆ ಮಳೆ:
ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅರ್ಲಟ್ ಇರುವುದರೊಂದಿಗೆ ಜ.12ರ ವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಇನ್ನು ಕೆಲವೆಡೆ ತುಂತುರು ಮಳೆಯಾಗಲಿದೆ.