ಕರ್ನಾಟಕ ರಾಜ್ಯ ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಯುವ ರೈತ ಘಟಕವನ್ನು 2022 ಜುಲೈ 16 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಕದ್ರಿ ಪಾರ್ಕ್ ಬಳಿಯ ಬಾಲಭವನದಲ್ಲಿ ಉದ್ಘಾಟಿಸಲಾಗುವುದು ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅದೇ ದಿನ ಎರಡು ವಿಚಾರ ಗೋಷ್ಠಿಗಳನ್ನು ಹಮ್ಮಿಕೊಂಡಿದ್ದು, ಜಿಲ್ಲಾ ಯುವ ರೈತ ಘಟಕವನ್ನು ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧ್ಯಕ್ಷರಾದ ಪ್ರಕಾಶ್ ಫರ್ನಾಂಡೀಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರೆ, ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ರವಿಕಿರಣ್ ಪೂಣಚ್ಚ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ದರ್ಶನ್ ಪುಟ್ಟಣ್ಣಯ್ಯ ಮತ್ತು ರಾಜ್ಯ ಕೋಶಾಧಿಕಾರಿ ಟಿ.ಎಸ್. ಪ್ರಸನ್ನ ಮತ್ತಿತರರು ಭಾಗವಹಿಸಲಿದ್ದಾರೆ.ಉದ್ಘಾಟನೆಯ ನಂತರದಲ್ಲಿ ನಡೆಯುವ ವಿಚಾರ ಗೋಷ್ಠಿಗಳಲ್ಲಿ ಮೊದಲನೆಯದು “ನೈಸರ್ಗಿಕ ಕೃಷಿ ಮತ್ತು ಬದುಕು”. ಈ ಕುರಿತು ರೈತ ಮುಖಂಡರಾದ ಪ್ರಸನ್ನ ಎನ್ ಗೌಡ ವಿಷಯ ಮಂಡನೆ ಮಾಡಲಿದ್ದಾರೆ.
ಎರಡನೆಯ ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಎಸ್.ಸಿ.ಮಧುಚಂದನ್ “ಯುವ ಜನತೆ, ಉದ್ಯೋಗಾವಕಾಶಗಳು ಹಾಗೂ ತರಬೇತಿ” ಎನ್ನುವ ವಿಷಯ ಮಂಡನೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘವು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.